July 29, 2026
#Uncategorized

ಕಾವೇರಿ ವಿಚಾರವಾಗಿ CWMA ಆದೇಶಕ್ಕೆ ತಡೆ ಕೋರಿ ಅರ್ಜಿ ಸಲ್ಲಿಸಿದ್ದೇವೆ


ನವದೆಹಲಿ: ಕಾವೇರಿ ನದಿಯಿಂದ ಹದಿನೈದು ದಿನಗಳ ಕಾಲ ನಿತ್ಯ ಐದು ಸಾವಿರ ಕ್ಯೂಸೆಕ್ ನೀರು ಹರಿಸಲು CWMA (ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ) ಆದೇಶ ನೀಡಿದ್ದು, ಈ ಆದೇಶಕ್ಕೆ ತಡೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನವದೆಹಲಿಯ ಖಾಸಗಿ ಹೋಟೇಲ್‌ನಲ್ಲಿ ನಡೆದ ಸರ್ವ ಪಕ್ಷ ಸಂಸದರ ಸಭೆ ಬಳಿಕ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಯುವ ಕೆಲಸ ಮಾಡಲಾಗುವುದು ಎಂದು ಭರವಸೆ‌ ನೀಡಿದರು. ಮಳೆಯ ಕೊರತೆ ಅವಧಿಯಲ್ಲಿ ಸಂಕಷ್ಟ ಸೂತ್ರ ಇಲ್ಲದಿರುವುದು ಸಮಸ್ಯೆ, ಈ ಸಂಕಷ್ಟ ಹೆಚ್ಚಲು ಕಾರಣವಾಗಿದೆ. ಕೇಂದ್ರ ಜಲ ಸಂಪನ್ಮೂಲ ಸಚಿವರ ಜತೆ ಸಂಜೆ ಸಭೆ ನಡೆಸುತ್ತಿದ್ದೇವೆ. ಎರಡೂ ರಾಜ್ಯದವರನ್ನು ಕರೆದು ಅಹವಾಲು ಕೇಳುವ ಅಧಿಕಾರ ವ್ಯಾಪ್ತಿ ಪ್ರಧಾನಿಯವರಿಗೆ ಇದೆ. ಹೀಗಾಗಿ ನಾವು ಪ್ರಧಾನಿ ಅವರ ಮಧ್ಯಪ್ರವೇಶಕ್ಕೆ ಮನವಿ ಮಾಡಿದ್ದೇವೆ ಎಂದಿದ್ದಾರೆ. 

ಈಗಾಗಲೇ ರಾಜ್ಯದಲ್ಲಿ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಗುರುತಿಸಿದ್ದೇವೆ. 123 ವರ್ಷಗಳಲ್ಲೇ ಆಗಸ್ಟ್ ತಿಂಗಳಿನಲ್ಲಿ ಅತಿ ಕಡಿಮೆ ಮಳೆ ದಾಖಲಾಗಿದೆ. ವಾಡಿಕೆಗಿಂತ ಅತಿ ಕಡಿಮೆ ಮಳೆ ಸಂಕಷ್ಟ ಹೆಚ್ಚಲು ಕಾರಣ. 177.2 TMC ನೀರು ಸಾಮಾನ್ಯ ವರ್ಷದಲ್ಲಿ, ಮಳೆ ಚೆನ್ನಾಗಿದ್ದಾಗ ನೀರು ಬಿಡಬೇಕು ಎಂದು ಹೇಳಿದೆ. ಆದರೆ ಇಂಥಾ ಸಂಕಷ್ಟದ ಸಂದರ್ಭದಲ್ಲಿ ಎಷ್ಟು ನೀರು ಬಿಡಬೇಕು ಎನ್ನುವ ಸೂತ್ರ ಇಲ್ಲದಿರುವುದು ಸಮಸ್ಯೆಯಾಗಿದೆ. ನಮಗೆ ಕುಡಿಯುವ ನೀರು, ಬೆಳೆ ರಕ್ಷಣೆ, ಕೈಗಾರಿಕೆಗೂ ನೀರಿಲ್ಲ. ಹೀಗಾಗಿ ನಾವು ಬಹಳ ಕಷ್ಟದಲ್ಲಿದ್ದೇವೆ ಎಂದು ತಿಳಿಸಿದ್ದಾರೆ.

CWMA, CWRA ಮುಂದೆ ಸಮರ್ಥವಾಗಿ ನಮ್ಮ ವಾಸ್ತವ ಪರಿಸ್ಥಿತಿಯನ್ನು ಮಂಡಿಸಿದ್ದೇವೆ. ತಮಿಳುನಾಡು ವಾದ ವಿರೋಧಿಸಿ ಸುಪ್ರೀಂ ಕೋರ್ಟ್‌ನಲ್ಲಿ ನಮ್ಮ ತಕರಾರು ಮಂಡಿಸಿದ್ದೇವೆ. ಒಟ್ಟು ಮೂರು ಬಾರಿ ಸರ್ವ ಪಕ್ಷ ಸಭೆ ನಡೆಸಿದ್ದೇವೆ. 5 ಸಾವಿರ ಕ್ಯೂಸೆಕ್ಸ್ ನೀರು ಬಿಡಲಾಗುತ್ತಿಲ್ಲ ಎಂದು CWMA ಮುಂದೆಯೂ ಮನವಿ ಸಲ್ಲಿಸಲಿದ್ದೇವೆ. 10 ಸಾವಿರ ಕ್ಯೂಸೆಕ್ಸ್ ನೀರು ಬಿಡಬೇಕು ಎನ್ನುವ ಆದೇಶ ಬಂದಾಗ, 5 ಸಾವಿರ ಕ್ಯೂಸೆಕ್ಸ್ ನೀರು ಬಿಡಬೇಕು ಅಂದಾಗೆಲ್ಲಾ ಒಟ್ಟು ಮೂರು ಬಾರಿ ನಾವು ಸರ್ವ ಪಕ್ಷ ಸಭೆ ಕರೆದಿದ್ದೇವೆ ಎಂದಿದ್ದಾರೆ. 

Leave a comment

Your email address will not be published. Required fields are marked *