ಕಾವೇರಿ ಕಿಚ್ಚು – ಶನಿವಾರ ಮಂಡ್ಯ ಬಂದ್ಗೆ ಕರೆ
ಮಂಡ್ಯ: ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಶನಿವಾರ ಮಂಡ್ಯ ಜಿಲ್ಲೆಯ ಬಂದ್ಗೆ ಕರೆ ನೀಡಿದೆ.

ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು, ವರ್ತಕರು, ಸಂಘಟನೆಗಳ ಮುಖಂಡರೊಂದಿಗೆ ಗುರುವಾರ (ಇಂದು) ನಡೆದ ಸಭೆಯಲ್ಲಿ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಬಂದ್ ನಿರ್ಧಾರ ಕೈಗೊಂಡಿದೆ. ಶುಕ್ರವಾರ (ಸೆ.22) ಮತ್ತೊಂದು ಸುತ್ತಿನ ಸಭೆಯಲ್ಲಿ ಬಂದ್ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಸಲು ನಿರ್ಧರಿಸಲಾಗಿದೆ.
ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಿದ ನಂತರ ರಾಜ್ಯದಲ್ಲಿ ರೈತರ ಆಕ್ರೋಶ ಹೆಚ್ಚಾಗಿದ್ದು, ಚಿಕ್ಕಬಳ್ಳಾಪುರದಲ್ಲೂ ರೈತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.
ಚಿಕ್ಕಬಳ್ಳಾಪುರ ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ರೈತರು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಕಿಡಿ ಕಾರಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಅವರು ರೈತಪರ ನಿಲುವುಗಳನ್ನ ಕೈಗೊಳ್ಳಬೇಕು, ತಮಿಳುನಾಡಿಗೆ ನೀರು ನಿಲ್ಲಿಸಲು ಬೇಕಾದ ಕ್ರಮ ಕೈಗೊಳ್ಳಿ. ಬೇಕಿದ್ದರೆ ನಿಮ್ಮ ಜೊತೆಗೆ ನಾವೂ ಜೈಲಿಗೆ ಬರ್ತೇವೆ ಎಂದು ಆಕ್ರೋಶ ಹೊರಹಾಕಿದ್ದಾರೆ.












































































































































































































































































































































































































































































































































































































































































































































































































































































































































































































































































































































