ಸೂಕ್ತ ಬಂದೋಬಸ್ತ್ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸೂಚನೆ
ಬೆಂಗಳೂರು ಸೆ.25: ನಿತ್ಯ ಐದು ಸಾವಿರ ಕ್ಯೂಸೆಕ್ನಂತೆ 15 ದಿನಗಳ ಕಾಲ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುವ ಸಿಡಬ್ಲ್ಯುಎಂಎ ಮತ್ತು ಸಿಡಬ್ಲ್ಯುಆರ್ಸಿ ಆದೇಶವನ್ನು ಸುಪ್ರಿಂಕೋರ್ಟ್ ಎತ್ತಿ ಹಿಡಿದಿದೆ. ನ್ಯಾಯಾಲಯದ ಈ ನಿರ್ಧಾರವನ್ನು ವಿರೋಧಿಸಿ ರಾಜ್ಯದಲ್ಲಿ ಕನ್ನಡ ಪರ ಸಂಘಟನೆಗಳು, ರೈತರು ಮತ್ತು ಬಿಜೆಪಿ ಪ್ರತಿಭಟನೆ ಮಾಡುತ್ತಿವೆ. ಮಂಗಳವಾರ (ಸೆ.26) ರಂದು ಬೆಂಗಳೂರು ಬಂದ್ಗೆ ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ನಡೆಸಿದರು. ಬಂದ್ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮತ್ತು ಕಾವೇರಿ ಕೊಳ್ಳದ ಜಿಲ್ಲೆಗಳಲ್ಲಿ ಸೂಕ್ತ ಬಂದೋಬಸ್ತ್ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಪ್ರತಿಭಟನೆ ಮಾಡಲು ಪ್ರಜಾಪ್ರಭುತ್ವದಲ್ಲಿ ಅವಕಾಶ ಇದೆ. ನಾವು ಪ್ರತಿಭಟನೆಯನ್ನು ಅಡ್ಡಿ ಪಡಿಸಲು ಹೋಗಲ್ಲ. ಆದರೆ ಇದರಲ್ಲಿ ಬಿಜೆಪಿ, ಜೆಡಿಎಸ್ನವರು ರಾಜಕೀಯ ಮಾಡುತ್ತಿದ್ದಾರೆ. ಸರ್ವಪಕ್ಷ ಸಭೆಯಲ್ಲಿ ಅವರು ನಮಗೆ ರಾಜೀನಾಮೆ ಕೊಡಿ ಅಂದ್ರಾ? ಈಗ ಕೊಡಿ ಎಂದು ಹೇಳುತ್ತಾರೆ. ಅವರು ರಾಜಕೀಯ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದರು.
ಕೋರ್ಟ್ ಆದೇಶವನ್ನು ಪಾಲಿಸಬೇಕಾದ ಅನಿವಾರ್ಯವಿದೆ. ನಾಳೆ ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ಇದೆ. ನಮ್ಮ ವಕೀಲರು ಸಮರ್ಥವಾಗಿ ವಾದ ಮಂಡಿಸುತ್ತಾರೆ ಎಂದು ಹೇಳಿದರು. ಸಭೆಯಲ್ಲಿ ಡಿಜಿ-ಐಜಿಪಿ ಅಲೋಕ್ ಮೋಹನ್, ಬೆಂಗಳೂರು ನಗರ ಆಯುಕ್ತ ದಯಾನಂದ್, ಸಿಎಸ್ ವಂದಿತಾ ಶರ್ಮ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.














































































































































































































































































































































































































































































































































































































































































































































































































































































































































































































































































































































