ಭಾರತಕ್ಕೆ ಬಂದ ಪಾಕ್ ತಂಡಕ್ಕೆ ಕೇಸರಿ ಶಾಲು ಹಾಕಿ ಸ್ವಾಗತ
ಹೈದರಾಬಾದ್: ಭಾರತದ ಆತಿಥ್ಯದಲ್ಲಿ ಇದೇ ಅಕ್ಟೋಬರ್ 5 ರಿಂದ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಯನ್ನಾಡಲು ಪಾಕಿಸ್ತಾನ ಕ್ರಿಕೆಟ್ ತಂಡ ಬುಧವಾರ ತಡರಾತ್ರಿ ಹೈದರಾಬಾದ್ಗೆ ಬಂದಿಳಿದಿದೆ. ಈ ವೇಳೆ ಪಾಕಿಸ್ತಾನ ತಂಡದ ಆಟಗಾರರಿಗೆ ವಿವಿಧ ರೀತಿಯ ಶಾಲುಗಳನ್ನ ಹೊದಿಸಿ ಸಾಂಪ್ರದಾಯಿಕವಾಗಿ ಸ್ವಾಗತಿಸಲಾಗಿದೆ.PauseUnmute
ಈ ನಡುವೆ ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಆಜಂ ಸೇರಿದಂತೆ ಕೆಲವು ಆಟಗಾರರಿಗೆ ಕೇಸರಿ ಶಾಲು ಹಾಕಿ ಸ್ವಾಗತಿಸಿದ್ದು, ಇದೀಗ ಟ್ವಿಟರ್ನಲ್ಲಿ ಸಖತ್ ಟ್ರೆಂಡ್ ಆಗಿದೆ. ಹೈದರಾಬಾದ್ ವಿಮಾನ ನಿಲ್ದಾಣಕ್ಕೆ ಬಂದ ಪಾಕಿಸ್ತಾನ ತಂಡದ ಆಟಗಾರರಿಗೆ ಕೇಸರಿ ಸಾಲು ಹಾಕಿ ಭವ್ಯ ಸ್ವಾಗತ ಕೋರಿ ಬರಮಾಡಿಕೊಳ್ಳಲಾಯಿತು. ಈ ವೇಳೆ ಭಾರೀ ಬಿಗಿ ಭದ್ರತೆಯನ್ನೂ ನಿಯೋಜನೆ ಮಾಡಲಾಗಿತ್ತು.
ವಿಶ್ವಕಪ್ ಟೂರ್ನಿಗೂ ಮುನ್ನ ಪಾಕಿಸ್ತಾನವು ಸೆಪ್ಟೆಂಬರ್ 29ರಂದು ನ್ಯೂಜಿಲೆಂಡ್ ವಿರುದ್ಧ ಹೈದರಾಬಾದ್ನಲ್ಲಿ ಅಭ್ಯಾಸ ಪಂದ್ಯವನ್ನಾಡಲಿದೆ. ಅಕ್ಟೋಬರ್ 3 ರಂದು ಆಸ್ಟ್ರೇಲಿಯಾ ವಿರುದ್ಧ ಕೊನೆಯದ್ದಾಗಿ ಅಭ್ಯಾಸ ಪಂದ್ಯಗಳನ್ನಾಡಲಿದೆ. ಆ ನಂತರ ವಿಶ್ವಕಪ್ ಟೂರ್ನಿಯಲ್ಲಿ ಪಾಲ್ಗೊಳ್ಳಲಿದೆ. ಅದಕ್ಕಾಗಿ ಪಾಕ್ ತಂಡ ಸೆ.27ರ ತಡರಾತ್ರಿ ಹೈದರಾಬಾದ್ಗೆ ಬಂದಿಳಿದಿದೆ.
ಪಾಕ್ ಆಟಗಾರರು ಕೇಸರಿ ಶಾಲು ಧರಿಸಿದ ಫೋಟೊ ಮತ್ತು ವೀಡಿಯೋ ಇದೀಗ ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿದೆ. ಪಾಕ್ ತಂಡದ ನಾಯಕ ಬಾಬರ್ ಆಜಂ ಅವರನ್ನ ನೆಟ್ಟಿಗರು ತೆಲಂಗಾಣದ ಬಿಜೆಪಿ ಯುವ ಘಟಕದ ನಾಯಕ ಎಂದು ಟ್ರೋಲ್ ಮಾಡಿದ್ದಾರೆ.
ಪಾಕಿಸ್ತಾನ ತಂಡ ಕೆಲವು ದಿನಗಳ ಹಿಂದೆಯೇ ಭಾರತಕ್ಕೆ ಬರಬೇಕಿತ್ತು. ಆದರೆ ವೀಸಾ ಸಮಸ್ಯೆಯಿಂದ ಪ್ರಯಾಣ ಅಸಾಧ್ಯವಾಗಿತ್ತು. ಇದೇ ವಿಚಾರವಾಗಿ ಪಾಕ್ ಕ್ರಿಕೆಟ್ ಮಂಡಳಿ ವಿಶ್ವಕಪ್ಗೆ ಪೂರ್ವ ತಯಾರಿ ನಡೆಸಲು ಸರಿಯಾದ ವ್ಯವಸ್ಥೆ ಇಲ್ಲವೆಂದು ಜಾಗತಿಕ ಸಂಸ್ಥೆಯೊಂದಿಗೆ ಕಳವಳ ವ್ಯಕ್ತಪಡಿಸಿತ್ತು. ಕೊನೆಗೆ ಐಸಿಸಿ ಮಧ್ಯಪ್ರವೇಶಿಸಿ ಈ ಸಮಸ್ಯೆಯನ್ನು ಬಗೆಹರಿಸಿ ಪಾಕಿಸ್ತಾನ ಕ್ರಿಕೆಟ್ ತಂಡದ ಸದಸ್ಯರಿಗೆ ಭಾರತೀಯ ವೀಸಾಗಳನ್ನು ನೀಡುವ ವ್ಯವಸ್ಥೆ ಮಾಡಿತ್ತು.
7 ವರ್ಷಗಳ ಬಳಿಕ ಭಾರತಕ್ಕೆ ಕಾಲಿಟ್ಟ ಪಾಕ್:
ಪಾಕಿಸ್ತಾನ ಕ್ರಿಕೆಟ್ ತಂಡ 7 ವರ್ಷಗಳ ಬಳಿಕ ಭಾರತಕ್ಕೆ ಕಾಲಿಟ್ಟಿದೆ. 2008ರಲ್ಲಿ ನಡೆದ ಮುಂಬೈ ದಾಳಿಯ ಬಳಿಕ ಭಾರತ ಮತ್ತು ಪಾಕಿಸ್ತಾನ ದ್ವಿಪಕ್ಷೀಯ ಸರಣಿ ಆಡುವುದನ್ನೇ ನಿಲ್ಲಿಸಿದೆ. ಆದ್ರೆ 2016ರಲ್ಲಿ ನಡೆದಿದ್ದ ಟಿ20 ವಿಶ್ವಕಪ್ ಟೂರ್ನಿ ಆಡಲು ಕೊನೆಯ ಬಾರಿ ಪಾಕ್ ತಂಡ ಭಾರತಕ್ಕೆ ಬಂದಿತ್ತು. ಅದಾದ ನಂತರ ಐಸಿಸಿ ಟೂರ್ನಿಯಲ್ಲಿ ಮಾತ್ರವೇ ಕಾಣಿಸಿಕೊಳ್ಳುತ್ತಿದ್ದವು. ಇದೀಗ 7 ವರ್ಷಗಳ ಬಳಿಕ ಪಾಕಿಸ್ತಾನ ತಂಡ ಭಾರತಕ್ಕೆ ಭೇಟಿ ನೀಡಿದೆ.
ಅಕ್ಟೋಬರ್ 14 ರಂದು ಹೈವೋಲ್ಟೇಜ್ ಕದನ:
ಅ.5ರಿಂದ ನ.19ರ ವರೆಗೆ ಭಾರತದ ವಿವಿಧ ಕ್ರೀಡಾಂಗಣದಲ್ಲಿ ವಿಶ್ವಕಪ್ ಟೂರ್ನಿ ನಡೆಯಲಿದೆ. ಭಾರತ ಮತ್ತು ಪಾಕ್ ನಡುವಿನ ಹೈವೋಲ್ಟೇಜ್ ಕದನ ಅಕ್ಟೋಬರ್ 14ರಂದು ಅಹಮದಾಬಾದ್ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯ ಕಣ್ತುಂಬಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯ್ತಿದ್ದಾರೆ.








































































































































































































































































































































































































































































































































































































































































































































































































































































































































































































































































































































