2024ಕ್ಕೆ ರಾಜ್ಯದಲ್ಲಿ ಮತ್ತೆ ವಿಧಾನಸಭೆ ಚುನಾವಣೆ ನಡೆಯುವುದು ಖಚಿತ
ರಾಮನಗರ: ಇಷ್ಟು ಕೆಟ್ಟ ಸರ್ಕಾರವನ್ನು ನಾನು ನೋಡಿಯೇ ಇಲ್ಲ. ಆಂತರಿಕ ಕಚ್ಚಾಟದಿಂದ ಈ ಸರ್ಕಾರ ಬೀಳುತ್ತದೆ. 2024ಕ್ಕೆ ಮತ್ತೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುವುದು ಖಚಿತ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.
ಬಿಡದಿಯ ತಮ್ಮ ತೋಟದ ಮನೆಯಲ್ಲಿ ನಡೆದ ರಾಮನಗರ ಜಿಲ್ಲಾ ಜೆಡಿಎಸ್ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಸಾರ್ವಜನಿಕವಾಗಿ ನನ್ನ ಕೈ ಮೇಲೆ ಎತ್ತಿ ಜೋಡೆತ್ತು ಎಂದು ಹೇಳಿದ ನಯವಂಚಕ ಮಾತುಗಳನ್ನು ನಂಬಿ ಮೋಸ ಹೋದೆ. ಆಮೇಲೆ ಅವರು ನನ್ನನ್ನು ನಡುರಸ್ತೆಯಲ್ಲಿ ಕೈ ಬಿಟ್ಟು ಎತ್ತು, ಗಾಡಿಯೊಂದಿಗೆ ಪಲಾಯನ ಮಾಡಿದರು. 2018 ಸರ್ಕಾರ ಹೋಗಿದ್ದು ಡಿ.ಕೆ ಶಿವಕುಮಾರ್ ಅವರಿಂದಲೇ ಹೊರತು ನನ್ನಿಂದ ಅಲ್ಲ. ನನಗೂ ರಮೇಶ್ ಜಾರಕಿಹೊಳಿ ಅವರಿಗೂ ವೈಷಮ್ಯ ಇತ್ತಾ? ಬೆಳಗಾವಿ ಡಿಸಿಸಿ ಬ್ಯಾಂಕ್ ರಾಜಕೀಯಕ್ಕೆ ನಾನು ಬಲಿಪಶುವಾದೆ. ಅವರು ಬೆಳಗಾವಿ ರಾಜಕೀಯಕ್ಕೆ ಕೈಹಾಕಿದ್ದು ಯಾಕೆ? ನಾನು ಕುಮಾರಣ್ಣನ ಸರ್ಕಾರ ಉಳಿಸೋಕೆ ಪ್ರಾಮಾಣಿಕ ಪ್ರಯತ್ನ ಮಾಡಿದೆ ಎಂದು ಮೊಸಳೆ ಕಣ್ಣೀರು ಹಾಕಿ ಪ್ರಚಾರ ತೆಗೆದುಕೊಂಡರು. ಆಮೇಲೆ ನೋಡಿದರೆ ಒಳಗೊಳಗೇ ಮಾಡುವುದೆಲ್ಲ ಮಾಡಿದರು ಎಂದು ಅಸಮಾಧಾನ ಹೊರಹಾಕಿದರು.
ಸಭೆಯಲ್ಲಿ ಕನಕಪುರ ಕ್ಷೇತ್ರದ ಜೆಡಿಎಸ್ ಮುಖಂಡರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಅವರನ್ನು ನಂಬಿ ನಾನು ಕುತ್ತಿಗೆ ಕೊಯ್ದುಕೊಂಡಿದ್ದೇನೆ. ನಿಮ್ಮ ಕುತ್ತಿಗೆಯನ್ನು ಕೊಯ್ದಿದ್ದೇನೆ. ಅವರಿಂದ ನನಗೆ, ನಿಮಗೆ ಅನ್ಯಾಯ ಆಗಿದೆ. ಅದನ್ನು ಬಿಟ್ಟರೆ ಕನಕಪುರ ಜನರಿಗೆ ನನ್ನಿಂದ ಎಳ್ಳಷ್ಟೂ ಅನ್ಯಾಯ ಆಗಿಲ್ಲ. ಆಗಿರುವ ಅನ್ಯಾಯ ಸರಿ ಮಾಡುವ ಹೊಣೆ ನನ್ನದು ಎಂದು ಡಿಕೆಶಿ ವಿರುದ್ಧ ಕೆಂಡಕಾರಿದರು.
ಕೋಟೆ ಕಟ್ಟಿ ಮೆರೆದೋರೆಲ್ಲ ಏನೇನೋ ಆಗಿ ಹೋದರು. ಅದು ಇವರಿಗೂ ಅನ್ವಯ ಆಗುತ್ತದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ 2 ರಿಂದ 3 ಲಕ್ಷ ಮತಗಳ ಅಂತರದಲ್ಲಿ ಗೆಲ್ಲಬೇಕು. ಅದಕ್ಕೆ ನೀವೆಲ್ಲರೂ ಶ್ರಮ ಹಾಕಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಈ ಮೈತ್ರಿಕೂಟದ ಮೂಲಕ ಇಡೀ ರಾಜ್ಯಕ್ಕೆ-ದೇಶಕ್ಕೆ ನಾವು ಒಳ್ಳೆಯ ಸಂದೇಶ ಕೊಡಬೇಕು. ನಾವೆಲ್ಲರೂ ನಂಬಿಕೆ, ವಿಶ್ವಾಸ, ಪ್ರಾಮಾಣಿಕತೆಯಿಂದ ಕೆಲಸ ಮಾಡೋಣ. ಯಾರೇ ಮೈತ್ರಿಕೂಟದ ಅಭ್ಯರ್ಥಿ ಆದರೂ ನಾವು ಒಟ್ಟಾಗಿ ಕೆಲಸ ಮಾಡೋಣ ಎಂದು ಕರೆ ನೀಡಿದರು.
ಕಳೆದ ಬಾರಿ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಅವರಿಗೆ ಮೋಸ ಮಾಡಿದ ಹಾಗೆ ಇಲ್ಲಿಯೂ ನಾವು ಮಾಡಿದ್ದಿದ್ದರೆ, ಆ ವ್ಯಕ್ತಿ (ಡಿ.ಕೆ.ಸುರೇಶ್) ಯ ಕಥೆ ಅಂದೇ ಮುಗಿದು ಹೋಗುತ್ತಿತ್ತು. ಆದರೆ, ನಾವು ಮೈತ್ರಿ ಧರ್ಮ ಪಾಲಿಸಿದೆವು. ಅವರು ನಮಗೆ ಕೇಡು ಬಗೆದರು ಎಂದು ಕಿಡಿ ಕಾರಿದರು.
ಇಷ್ಟು ಕೆಟ್ಟ ಸರ್ಕಾರವನ್ನು ನಾನು ನೋಡಿಯೇ ಇಲ್ಲ. ಆಂತರಿಕ ಕಚ್ಚಾಟದಿಂದ ಈ ಸರ್ಕಾರ ಹೋಗುತ್ತದೆ. 2024ರಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುವುದು ಖಚಿತ. ಆ ಚುನಾವಣೆಗೆ ಆ ವ್ಯಕ್ತಿ ಅಭ್ಯರ್ಥಿ ಆಗುವುದೇ ಅನುಮಾನ, ಏನು ಆಗುತ್ತದೆ ಎನ್ನುವುದು ನನಗೆ ಗೊತ್ತಿದೆ. ಜೀವನದಲ್ಲಿ ಡಿಕೆಶಿ ಜೊತೆಗೆ ಇನ್ನೆಂದಿಗೂ ರಾಜಿ ಆಗಿಲ್ಲ. ಒಮ್ಮೆ ಅವರ ಜೊತೆ ಸರ್ಕಾರ ಮಾಡಿದ್ದರಿಂದ ನಾನು ಈಗಲೂ ನೋವು ಅನುಭವಿಸ್ತಾ ಇದ್ದೇನೆ. ಅವರು ಒಮ್ಮೆ ತಿಹಾರ್ ಜೈಲು ನೋಡಿಕೊಂಡು ಬಂದಿದ್ದಾರೆ. ಅವರು ಮತ್ತೆ ಅಲ್ಲಿಗೆ ಪರ್ಮನೆಂಟಾಗಿ ಹೋದರೂ ಅಚ್ಚರಿಯಿಲ್ಲ. ನಮ್ಮನ್ನು ಹಾಸನಕ್ಕೆ ಓಡಿಸಬಹುದು, ಅವರು ತಿಹಾರ್ ಜೈಲಿಗೆ ಓಡುವ ಕಾಲ ಹತ್ತಿರದಲ್ಲಿ ಇದೆ ಡಿಕೆಶಿ ವಿರುದ್ಧ ಲೇವಡಿ ಮಾಡಿದರು.













































































































































































































































































































































































































































































































































































































































































































































































































































































































































































































































































































































