ಸ್ವಾವಲಂಬಿ ಭಾರತವನ್ನು ರಚಿಸಲು ಬದ್ಧರಾಗಿ: ವಿದ್ಯಾರ್ಥಿಗಳಿಗೆ ರಾಜ್ಯಪಾಲರ ಕರೆ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಶಿಕ್ಷಣವನ್ನು ಕೌಶಲ್ಯ ಮತ್ತು ನೈತಿಕ ಮೌಲ್ಯಗಳೊಂದಿಗೆ ಜೋಡಿಸುವ ಮೂಲಕ ಸ್ವಾವಲಂಬಿ ಭಾರತವನ್ನು ರಚಿಸಲು ಬದ್ಧರಾಗಿದ್ದಾರೆ. ಈ ಬದ್ಧತೆಯನ್ನು ಪೂರೈಸಲು ಪ್ರತಿಯೊಬ್ಬರ ಕೊಡುಗೆಯನ್ನು ನಿರೀಕ್ಷಿಸಲಾಗಿದೆ. ಪ್ರಧಾನಿಗಳ ಈ ಆಶಯವನ್ನು ಈಡೇರಿಸಲು ವಿದ್ಯಾರ್ಥಿಗಳು ಕೈಜೋಡಿಸಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕರೆಕೊಟ್ಟಿದ್ದಾರೆ.
ನಗರದ ರೇವಾ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯದ 75 ವರ್ಷಗಳಲ್ಲಿ ದೇಶವು ಎಲ್ಲಾ ಕ್ಷೇತ್ರಗಳಲ್ಲಿ ಅಭೂತಪೂರ್ವ ಪ್ರಗತಿಯನ್ನು ಸಾಧಿಸಿದೆ. ದೇಶದ ಆರ್ಥಿಕತೆಯನ್ನು ಬಲಪಡಿಸಿದೆ. ಇಂದು ನಮ್ಮ ಆರ್ಥಿಕತೆಯು ವಿಶ್ವದ 5ನೇ ಅತಿದೊಡ್ಡ ಆರ್ಥಿಕತೆಯಾಗಿದೆ. ದೇಶವನ್ನು ಮತ್ತಷ್ಟು ಬಲಪಡಿಸಲು ಮತ್ತು ವಿಶ್ವದ ಅತಿದೊಡ್ಡ ಆರ್ಥಿಕತೆಯನ್ನು ಮಾಡಲು ನಿರ್ಧರಿಸಲಾಗಿದೆ. ಇದಕ್ಕಾಗಿ ಪ್ರತಿಯೊಬ್ಬರು ಶ್ರಮಿಸಬೇಕು ಎಂದು ಅವರು ಹೇಳಿದ್ದಾರೆ.
ಸ್ವಾತಂತ್ರ್ಯದ ಶತಮಾನೋತ್ಸವವನ್ನು ತಲುಪಲು ಇರುವ ಮುಂದಿನ 24 ವರ್ಷಗಳಲ್ಲಿ ದೇಶದ ಯುವಜನತೆ ಪ್ರಗತಿಯೆಡೆಗೆ ಸಾಗಬೇಕು. ಯಶಸ್ವಿ ಉದ್ಯಮಿಯಾಗುವ ಕನಸು ಕಾಣಬೇಕು ಮತ್ತು ಉದ್ಯೋಗಕ್ಕಾಗಿ ಇತರರ ಕಡೆಗೆ ನೋಡದೆ ಇತರರಿಗೆ ಉದ್ಯೋಗ ಒದಗಿಸುವವರಾಗಬೇಕು. ಇದಕ್ಕಾಗಿ ನೀವು ಮುಂದೆ ಬರಬೇಕು ಮತ್ತು ತಾಂತ್ರಿಕ ಕ್ಷೇತ್ರದಲ್ಲಿ ಪ್ರಾವೀಣ್ಯತೆಯನ್ನು ಗಳಿಸಬೇಕು. ಇದರ ಸಲುವಾಗಿ ಯೋಜಿತ ರೀತಿಯಲ್ಲಿ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ್ದಾರೆ.
ರಾಷ್ಟ್ರದ ಅಭಿವೃದ್ಧಿಯಲ್ಲಿ ವಿಶ್ವವಿದ್ಯಾಲಯಗಳು ಪ್ರಮುಖ ಪಾತ್ರವಹಿಸುತ್ತವೆ. ಈ ಬದಲಾಗುತ್ತಿರುವ ಸಮಯ ಮತ್ತು ಸಂದರ್ಭಗಳೊಂದಿಗೆ ತಮ್ಮನ್ನು ತಾವು ನವೀಕರಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಪ್ರಾಯೋಗಿಕವಾಗಿ ಸಾಮಾಜಿಕ ಮತ್ತು ಹೊಸ ಸಂಶೋಧನೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ವಿಶ್ವವಿದ್ಯಾಲಯದ ಶಿಕ್ಷಕರು ಮುಂದಾಗಬೇಕು ಎಂದಿದ್ದಾರೆ.
ಕರ್ನಾಟಕ ರಾಜ್ಯವು ಶಿಕ್ಷಣ, ಮಾಹಿತಿ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ದೇಶದ ಪ್ರಮುಖ ರಾಜ್ಯವಾಗಿದೆ. ಇಲ್ಲಿ ಅನೇಕ ವಿಶ್ವ ದರ್ಜೆಯ ಸಂಶೋಧನಾ ಕೇಂದ್ರಗಳು ಮತ್ತು ಶಿಕ್ಷಣ ಸಂಸ್ಥೆಗಳಿವೆ. ಅವುಗಳಲ್ಲಿ ಒಂದು ರೇವಾ ವಿಶ್ವವಿದ್ಯಾಲಯ. ಇದು ಸಾಮಾಜಿಕ, ಆರ್ಥಿಕ ಪರಿವರ್ತನೆಯನ್ನು ತರುವ ಮೂಲಕ ಸಮಾಜವನ್ನು ಸ್ವಾವಲಂಬಿಯನ್ನಾಗಿ ಮಾಡುವ ಉದ್ದೇಶದಿಂದ 2004 ರಲ್ಲಿ ಸ್ಥಾಪಿಸಲಾಗಿದೆ. ರೇವಾ ವಿಶ್ವವಿದ್ಯಾನಿಲಯ ಮತ್ತು ಸಾಮಾಜಿಕ ಸಾಮರಸ್ಯ, ಸಮೃದ್ಧಿ, ಶ್ರೇಷ್ಠತೆ, ಸಬಲೀಕರಣ, ಉದ್ಯಮಶೀಲತೆ ಮತ್ತು ಜ್ಞಾನೋದಯಕ್ಕಾಗಿ ಎಲ್ಲರಿಗೂ ಅಮೂಲ್ಯವಾದ ಶಿಕ್ಷಣವನ್ನು ಒದಗಿಸುವ ಮೂಲಕ ತಂತ್ರಜ್ಞಾನ ಆಧಾರಿತ ಶಿಕ್ಷಣವನ್ನು ಒದಗಿಸುವಲ್ಲಿ ದೇಶದ ಮತ್ತು ರಾಜ್ಯದ ಪ್ರಮುಖ ಸಂಸ್ಥೆಯಾಗಿದೆ ಎಂದು ಹೇಳಿದ್ದಾರೆ.
ರೇವಾ ವಿಶ್ವವಿದ್ಯಾನಿಲಯ ಆಧುನಿಕತೆಯ ಜೊತೆಗೆ ಭಾರತದ ಇತಿಹಾಸ, ಸಂಸ್ಕøತಿ ಮತ್ತು ನಾಗರಿಕತೆಗೆ ಸಂಬಂಧಿಸಿದ ತಾಂತ್ರಿಕ ಮತ್ತು ಪ್ರಾಯೋಗಿಕ ಶಿಕ್ಷಣವನ್ನು ನೀಡುತ್ತದೆ. ಇಷ್ಟೇ ಅಲ್ಲದೇ ನೃತ್ಯ, ಸಂಗೀತ, ಯೋಗ ಮುಂತಾದ ಶಿಕ್ಷಣವನ್ನು ವಿದ್ಯಾರ್ಥಿಗಳು ಇಲ್ಲಿ ಪಡೆಯುತ್ತಿದ್ದಾರೆ. ಇಲ್ಲಿ ಶಿಕ್ಷಣ ಪಡೆದ ಹಲವು ವಿದ್ಯಾರ್ಥಿಗಳು ಇಸ್ರೋದಲ್ಲಿಯೂ ಕೆಲಸ ಮಾಡುತ್ತಿದ್ದಾರೆ. ಅವರು ಚಂದ್ರಯಾನ-3ರ ಯಶಸ್ಸಿನಲ್ಲಿ ಮಹತ್ವದ ಕೊಡುಗೆ ನೀಡಿರುವುದು ಸಂತಸದ ವಿಚಾರವಾಗಿದೆ. ಈ ಸಾಧನೆಗಾಗಿ ನಾನು ಡಾ. ಪಿ. ಶ್ಯಾಮ್ ರಾಜು ಮತ್ತು ಅವರ ತಂಡವನ್ನು ಅಭಿಂದಿಸುತ್ತೇನೆ ಎಂದಿದ್ದಾರೆ.








































































































































































































































































































































































































































































































































































































































































































































































































































































































































































































































































































































