ಎಕ್ಸ್ಪ್ರೆಸ್ ವೇಯಲ್ಲಿ ಸರಣಿ ಅಪಘಾತ – ಹಲವರಿಗೆ ಗಾಯ
ಮಂಡ್ಯ: ಬೆಂಗಳೂರು- ಮೈಸೂರು ಎಕ್ಸ್ಪ್ರೆಸ್ ವೇಯಲ್ಲಿ ಮೂರು ಕಾರುಗಳ ನಡುವೆ ಸರಣಿ ಅಪಘಾತ (Accident) ಸಂಭವಿಸಿದ ಪರಿಣಾಮ ಹಲವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ಶ್ರೀರಂಗಪಟ್ಟಣ ಬಳಿಯ ಗೌರಿಪುರದ ಬಳಿ ಘಟನೆ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅಪಘಾತ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸುಮಾರು ಒಂದು ಕಿಲೋಮೀಟರ್ ಉದ್ದಕ್ಕೂ ವಾಹನಗಳು ನಿಂತಿದ್ದವು. ಸರಣಿ ಅಪಘಾತದಿಂದ ರಸ್ತೆ ಸಂಪೂರ್ಣ ಬಂದ್ ಆಗಿದ್ದು, ಹಲವು ನಿಮಿಷಗಳ ಬಳಿಕ ಮತ್ತೆ ರಸ್ತೆ ಸಂಚಾರ ಪ್ರಾರಂಭವಾಗಿದೆ.
ಸರಣಿ ಅಪಘಾತದ ವೇಳೆ ಒಂದು ಕಾರು ಹೊತ್ತಿ ಉರಿದಿದೆ. ಈ ವೇಳೆ ಕಾರಿನಲ್ಲಿ ಇದ್ದವರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಕಿಟಕಿ ಗಾಜು ಹೊಡೆದು ಕಾರಿನಲ್ಲಿದ್ದವರನ್ನು ರಕ್ಷಣೆ ಮಾಡಲಾಗಿದೆ. ಅಪಘಾತದ ವೇಳೆ ಮಂಡ್ಯ ಎಸ್ಪಿ ವಾಹನಕ್ಕೂ ಕಾರು ಡಿಕ್ಕಿಯಾಗಿದೆ. ಎಸ್ಪಿ ಯತೀಶ್ ಶ್ರೀರಂಗಪಟ್ಟಣ ಕಡೆಗೆ ಹೋಗುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಈ ಕುರಿತು ಮಂಡ್ಯ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.













































































































































































































































































































































































































































































































































































































































































































































































































































































































































































































































































































































