ಬೊಮ್ಮಾಯಿ ಆಸ್ಪತ್ರೆಗೆ ದಾಖಲು
ಬೆಂಗಳೂರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೊಣಕಾಲು ನೋವಿನಿಂದ ಬಳಲುತ್ತಿದ್ದ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಇರುವುದು ಪತ್ತೆಯಾಗಿದೆ. ಹೀಗಾಗಿ ಅವರನ್ನು ಹೃದಯ ಶಸ್ತ್ರಚಿಕಿತ್ಸೆಗೆ (Heart Surgery) ಒಳಪಡಿಸಲಾಗಿದೆ.
ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಬೊಮ್ಮಾಯಿ ಶೀಘ್ರ ಚೇತರಿಕೆಯಾಗುವಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾರೈಸಿದ್ದಾರೆ. ಶಸ್ತ್ರಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ನಿಕಟಪೂರ್ವ ಮುಖ್ಯಮಂತ್ರಿಗಳು, ಆತ್ಮೀಯರೂ ಆದ ಬಸವರಾಜ ಬೊಮ್ಮಾಯಿ ಅವರು ಆದಷ್ಟು ಶೀಘ್ರದಲ್ಲಿ ಸಂಪೂರ್ಣ ಗುಣಮುಖರಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಯಡಿಯೂರಪ್ಪ ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.
ಸದ್ಯ ಬೊಮ್ಮಾಯಿ ಆರೋಗ್ಯವಾಗಿದ್ದಾರೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ. ಅವರನ್ನು ವೈದ್ಯರು ಬುಧವಾರ ಡಿಸ್ಚಾರ್ಜ್ ಮಾಡುವ ಸಾಧ್ಯತೆಯಿದೆ.













































































































































































































































































































































































































































































































































































































































































































































































































































































































































































































































































































































