ಭಿಕ್ಷೆ ಬೇಡಲು ಹೋಗಿದ್ದೆ: ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕ ಕಿಡಿ
ಬೆಳಗಾವಿ: ಐತಿಹಾಸಿಕ ಕಿತ್ತೂರು ಉತ್ಸವಕ್ಕೆ ನಿರೀಕ್ಷಿತ ಪ್ರಮಾಣದಲ್ಲಿ ಅನುದಾನ ಬಿಡುಗಡೆ ಆಗದಿರುವ ವಿಚಾರಕ್ಕೆ ರಾಜ್ಯ ಸರ್ಕಾರದ ವಿರುದ್ಧ ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಿತ್ತೂರು ಉತ್ಸವಕ್ಕೆ ಇನ್ನಷ್ಟು ಅನುದಾನ ನೀಡಿ ಎಂದು ಭಿಕ್ಷೆ ಬೇಡಲು ಬೆಂಗಳೂರಿಗೆ ಹೋಗಿದ್ದೆ. ಈಗಾಗಲೇ ಉತ್ಸವಕ್ಕೆ ಸರ್ಕಾರ 2 ಕೋಟಿ ರೂ. ಅನುದಾನ ನೀಡಿದೆ. ಇನ್ನಷ್ಟು ಅನುದಾನ ಕೊಡಲಿ ಎಂದು ಭಿಕ್ಷೆ ಬೇಡಲು ಹೋಗಿದ್ದೆ. ಕಳೆದ ವರ್ಷದಿಂದ ರಾಜ್ಯಮಟ್ಟದ ಉತ್ಸವವಾಗಿ ಕಿತ್ತೂರು ಉತ್ಸವ ಆಚರಿಸಲಾಗಿತ್ತು ಎಂದಿದ್ದಾರೆ.
ಹಿಂದಿನ ಬಿಜೆಪಿ ಸಿಎಂ ಬಸವರಾಜ್ ಬೊಮ್ಮಾಯಿಯವರು ಈ ಉತ್ಸವವನ್ನು ರಾಜ್ಯಮಟ್ಟದ ಉತ್ಸವವನ್ನಾಗಿ ಘೋಷಣೆ ಮಾಡಿದ್ದರು. 2021ರಲ್ಲೇ ಕಿತ್ತೂರು ಉತ್ಸವವನ್ನು ರಾಜ್ಯಮಟ್ಟದ ಉತ್ಸವವಾಗಿ ಆಚರಿಸಲಾಗುವುದು ಎಂದು ಬೊಮ್ಮಾಯಿ ಹೇಳಿದ್ದರು. ಜೊತೆಗೆ ಕಿತ್ತೂರು ಉತ್ಸವಕ್ಕೆ 5 ಕೋಟಿ ರೂ. ಅನುದಾನ ನೀಡುವುದಾಗಿಯೂ ಘೋಷಣೆ ಮಾಡಿದ್ದರು. ಈಗಿನ ಸರ್ಕಾರ ಕೇವಲ 2 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.













































































































































































































































































































































































































































































































































































































































































































































































































































































































































































































































































































































