ಸಚಿವ ಶಿವಾನಂದ್ ಪಾಟೀಲ್ ಕೂಡಲೇ ರೈತರ ಕ್ಷಮೆ ಕೇಳಬೇಕು: ಹೆಚ್ಡಿಕೆ
ಬೆಂಗಳೂರು: ರೈತರ ಬಗ್ಗೆ ಸಚಿವ ಶಿವಾನಂದ್ ಪಾಟೀಲ್ ಉಡಾಫೆ ಹೇಳಿಕೆಗೆ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕೂಡಲೇ ಸಚಿವರು ಕ್ಷಮೆ ಕೇಳಿ, ಹೇಳಿಕೆ ವಾಪಸ್ ಪಡೆಯಬೇಕು ಅಂತ ಆಗ್ರಹಿಸಿದ್ದಾರೆ.
ಸಚಿವ ಶಿವಾನಂದ್ ಪಾಟೀಲ್ ಅವರು ರೈತರ ಬಗ್ಗೆ ನೀಡಿರುವ ಹೇಳಿಕೆ ಖಂಡನೀಯ. ಅನ್ನದಾತನ ಕಷ್ಟ, ಸಂಕಷ್ಟಗಳ ಬಗ್ಗೆ ಅವಹೇಳನ ಮಾಡುವುದು ಖಂಡಿತಾ ಸರಿಯಲ್ಲ. ಸಚಿವರು ಇಂತಹ ವಿಷಯಗಳ ಬಗ್ಗೆ ಬಹಳ ಎಚ್ಚರಿಕೆ, ಸೂಕ್ಷ್ಮತೆ, ಸಂಯಮದಿಂದ ಮಾತನಾಡಬೇಕು ಅಂತ ಕಿಡಿಕಾರಿದರು.
ನಾನು ಕೃಷಿಸಾಲ ಮನ್ನಾ ಮಾಡುವ ಮುನ್ನ ರಾಜ್ಯದಲ್ಲಿ ನಡೆದ ರೈತರ ಸರಣಿ ಆತ್ಮಹತ್ಯಾಕಾಂಡ ನೆನಪು ಮಾಡಿಕೊಂಡರೆ ಈಗಲೂ ನನ್ನ ಮೈ ನಡುಗುತ್ತದೆ. ರೈತ ಕೇಳುತ್ತಿರುವುದು ತನ್ನ ಹಕ್ಕನ್ನಷ್ಟೇ ಭಿಕ್ಷೆಯನ್ನಲ್ಲ. ಸಚಿವರು ಬೇಷರತ್ ಕ್ಷಮೆ ಕೇಳಬೇಕು. ತಮ್ಮ ಹೇಳಿಕೆಯನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.













































































































































































































































































































































































































































































































































































































































































































































































































































































































































































































































































































































