ರಾಮಮಂದಿರ ಉದ್ಘಾಟನೆಗೆ ಮಾಜಿ ಸಿಎಂ ಹೆಚ್ಡಿಕೆ ಕುಟುಂಬಕ್ಕೆ ಆಹ್ವಾನ
ಬೆಂಗಳೂರು: ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕುಟುಂಬಕ್ಕೆ ಆಹ್ವಾನ ನೀಡಲಾಗಿದೆ.
ರಾಮಮಂದಿರದಲ್ಲಿ ಜ.22 ರಂದು ನಡೆಯಲಿರುವ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಬರಬೇಕು ಎಂದು ಮಾಜಿ ಸಿಎಂ ಹೆಚ್ಡಿಕೆಗೆ ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಆಹ್ವಾನ ನೀಡಿದೆ.
ಜೆ.ಪಿ. ನಗರದಲ್ಲಿರುವ ಕುಮಾರಸ್ವಾಮಿ ಅವರ ನಿವಾಸಕ್ಕೆ ಭೇಟಿ ನೀಡಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘ ದ ಅಖಿಲ ಭಾರತೀಯ ಸಂಪರ್ಕ್ ಪ್ರಮುಖ್ ಆಗಿರುವ ರಾಮ ಲಾಲ್ ಮತ್ತಿತರರು ಆಹ್ವಾನ ಪತ್ರಿಕೆ ನೀಡಿದ್ದಾರೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಮೈತ್ರಿ ಬಳಿಕ ದೊಡ್ಡ ಗೌಡರ ಕುಟುಂಬದ ಸದಸ್ಯರು ಈಚೆಗೆ ದೆಹಲಿ ತೆರಳಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದರು. ಹೆಚ್.ಡಿ.ದೇವೇಗೌಡ, ಹೆಚ್.ಡಿ.ಕುಮಾರಸ್ವಾಮಿ, ಹೆಚ್.ಡಿ.ರೇವಣ್ಣ ಎಲ್ಲರೂ ಮೋದಿ ಅವರನ್ನು ಭೇಟಿ ಮಾಡಿದ್ದರು.
ಇದೇ ಜ.22 ರಂದು ಅಯೋಧ್ಯೆ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ಜರುಗಲಿದೆ. ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಸಿನಿಮಾ ತಾರೆಗಳಿಗೂ ಆಹ್ವಾನ ಪತ್ರಿಕೆ ನೀಡಲಾಗಿದೆ.








































































































































































































































































































































































































































































































































































































































































































































































































































































































































































































































































































































