ಶಿಕ್ಷಣ ಸಚಿವರ ತವರಲ್ಲೇ ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್
ಶಿವಮೊಗ್ಗ:
ಪೀಣ್ಯ ಬಳಿಯಿರುವ ಅಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಅಮಾನವೀಯ ಘಟನೆ ನಡೆದಿದ್ದು ರಾಜ್ಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಜೊತೆಗೆ ಈ ಪ್ರಕರಣ ರಾಜಕೀಯ ತಿರುವು ಪಡೆದು ಗಂಭೀರವಾಗಿ ಪರಿಗಣಿಸಿದ್ದ ಸಿಎಂ ಸಿದ್ಧರಾಮಯ್ಯ ಕ್ರಮಕ್ಕೆ ಸೂಚಿಸಿದ್ದರು. ಆದರೆ ಇದೀಗ ಇದೇ ರೀತಿಯ ಮತ್ತೊಂದು ಘಟನೆ ಮರುಕಳಿಸಿದೆ. ಅದರಲ್ಲೂ ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲೇ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಅಮಾನವೀಯ ಘಟನೆ ನಡೆದಿದೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ತವರು ಜಿಲ್ಲೆಯಲ್ಲೆ ಶಿವಮೊಗ್ಗದಲ್ಲಿ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಲಾಗಿದೆ. ಭದ್ರಾವತಿ ತಾಲೂಕಿನ ಕೋಮಾರನಹಳ್ಳಿ ಗ್ರಾ.ಪಂಚಾಯಿತಿಯ ಗುಡ್ಡದ ನೇರಲೆಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಶಂಕರಪ್ಪ ಹಾಗೂ ಇತರೆ ಶಿಕ್ಷಕರು ವಿದ್ಯಾರ್ಥಿಗಳ ಕೈಯಿಂದ ಶೌಚಾಲಯ ಸ್ವಚ್ಛಗೊಳಿಸಿದ್ದಾರೆ. ಮಕ್ಕಳು ಶೌಚಾಲಯ ಸ್ವಚ್ಛಗೊಳಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಬಗ್ಗೆ ದಲಿತ ಸಂಘರ್ಷ ಸಮಿತಿ ಶಿವಮೊಗ್ಗ ಎಸಿ ಸತ್ಯನಾರಾಯಣ ಅವರಿಗೆ ದೂರು ಸಲ್ಲಿಸಿದೆ. ಮಕ್ಕಳನ್ನು ದುರ್ಬಳಕೆ ಮಾಡಿದ ಶಿಕ್ಷಕರ ವಿರುದ್ಧ ಕ್ರಮಕ್ಕೆ ಸಂಘಟನೆ ಮತ್ತು ಪೋಷಕರು ಒತ್ತಾಯಿಸಿದ್ದಾರೆ.









































































































































































































































































































































































































































































































































































































































































































































































































































































































































































































































































































































