September 12, 2026
#ಬೆಂಗಳೂರು

ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲ್ಲ

ಬೆಂಗಳೂರು:
ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪುನರುಚ್ಚರಿಸಿದ್ದಾರೆ.
ಬೆಂಗಳೂರಿನಲ್ಲಿ ಲೋಕಸಭಾ ಚುನಾವಣೆ ವಿಚಾರವಾಗಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಲೋಕಸಭೆಗೆ ನಾನು ಸ್ಪರ್ಧಿಸುವುದಿಲ್ಲ. ನಾನು ಲೋಕಸಭೆ ಟಿಕೆಟ್ ಆಕಾಂಕ್ಷಿ ಸಹ ಅಲ್ಲ. ನನ್ನ ಅಭಿಪ್ರಾಯ ಈಗಾಗಲೇ ಸ್ಪಷ್ಟವಾಗಿ ಸಾಕಷ್ಟು ಬಾರಿ ಹೇಳಿದ್ದೇನೆ. ಹೇಳಿಕೆಯನ್ನು ಬದಲಾಯಿಸುವ ವ್ಯಕ್ತಿ ನಾನಲ್ಲ ಎಂದಿದ್ದಾರೆ.
ಮಂಡ್ಯ ಜಿಲ್ಲೆಯಿಂದಲೂ ಲೋಕಸಭಾ ಚುನಾವಣೆಯ ಟಿಕೆಟ್ ಆಕಾಂಕ್ಷಿ ಅಲ್ಲ. ಈ ವಿಚಾರವಾಗಿ ಗುರುವಾರ ಮಂಡ್ಯ ಜಿಲ್ಲೆಯಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ನಮ್ಮ ನಾಯಕರು, ಯಾರು ಸ್ಪರ್ಧೆ ಮಾಡಬೇಕು ಎಂಬ ಬಗ್ಗೆ ಚರ್ಚೆ ಮಾಡಲಿದ್ದಾರೆ. ಈಗಾಗಲೇ ಈ ಬಗ್ಗೆ ಚರ್ಚೆಗಳು ಪ್ರಾರಂಭವಾಗಿದೆ. ದೇವೇಗೌಡರು, ಕುಮಾರಸ್ವಾಮಿ ಹಾಗೂ ನಮ್ಮ ಮಂಡ್ಯ ನಾಯಕರು ಕುಳಿತು ಅಭ್ಯರ್ಥಿಗಳ ಬಗ್ಗೆ ಚರ್ಚೆ ಮಾಡಲಿದ್ದಾರೆ. ನಮ್ಮ ನಾಯಕರ ಜೊತೆಗೆ ಬಿಜೆಪಿ ಅಭ್ಯರ್ಥಿಗಳು, ಕಾರ್ಯಕರ್ತ ಭಾವನೆಗಳನ್ನು ಕಲೆ ಹಾಕಿ ಅಂತಿಮವಾಗಿ ಅಭ್ಯರ್ಥಿಗಳ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಲೋಕಸಭಾ ಚುನಾವಣೆಗೆ ಹೆಚ್.ಡಿ ಕುಮಾರಸ್ವಾಮಿಯವರ ಸ್ಪರ್ಧೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇವೆಲ್ಲ ಊಹಾಪೋಹಗಳು ಅಷ್ಟೆ. ಇದರ ಬಗ್ಗೆ ನಮಗೆ ಸ್ಪಷ್ಟತೆ ಇಲ್ಲ. ಸ್ವಲ್ಪ ದಿನ ಎಲ್ಲವೂ ಗೊತ್ತಾಗಲಿದೆ. ಯಾರು ಸ್ಪರ್ಧೆ ಮಾಡ್ತಾರೆ ಅನ್ನೋದು ಮುಖ್ಯ ಅಲ್ಲ. ಮಂಡ್ಯ ಜಿಲ್ಲೆ ಸ್ಥಾನವನ್ನು ಜೆಡಿಎಸ್ ಪಡೆದುಕೊಳ್ಳಬೇಕು. ಅದು ಬಹಳ ಮುಖ್ಯ. ಮುಂದಿನ ದಿನಗಳಲ್ಲಿ ಎಲ್ಲವೂ ತೀರ್ಮಾನ ಆಗುತ್ತದೆ ಎಂದಿದ್ದಾರೆ.

Leave a comment

Your email address will not be published. Required fields are marked *