July 29, 2026
#ರಾಷ್ಟ್ರೀಯ

ಮತ್ತೊಬ್ಬ ಬಿಜೆಪಿ ನಾಯಕ ದೆಹಲಿಗೆ ಲೋಕಸಭೆ ಟಿಕೆಟ್‌ಗೆ ಸುಧಾಕರ್ ಕಸರತ್ತು?

ನವದೆಹಲಿ:
ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ರಾಷ್ಟ್ರೀಯ ಪಕ್ಷಗಳಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಬಿಜೆಪಿ ಮಾಜಿ ಸಚಿವ ಡಾ. ಕೆ.ಸುಧಾಕರ್ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿರುವುದು ಕುತೂಹಲ ಮೂಡಿಸಿದೆ.
ಸುಧಾಕರ್ ಅವರು ದೆಹಲಿಗೆ ತೆರಳಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬಿ.ಎಲ್.ಸಂತೋಷ್ ಜೊತೆಗಿರುವ ಫೋಟೋ ವೈರಲ್ ಆಗಿದೆ. ಚಿಕ್ಕಬಳ್ಳಾಪುರ ಲೋಕಸಭೆ ಟಿಕೆಟ್‌ಗೆ ಸುಧಾಕರ್ ಕಸರತ್ತು ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರೋಗ್ಯ ಸಚಿವರಾಗಿದ್ದ ಡಾ. ಕೆ.ಸುಧಾಕರ್ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲನುಭವಿಸಿದ್ದರು. ಇವರ ವಿರುದ್ಧ ಸ್ಪರ್ಧೆಗಿಳಿದಿದ್ದ ಕಾಂಗ್ರೆಸ್‌ನ ಪ್ರದೀಪ್ ಈಶ್ವರ್ ಗೆಲುವು ಸಾಧಿಸಿದ್ದರು. ಈಗ ಲೋಕಸಭೆ ಚುನಾವಣೆಗೆ ಕಾಲ ಸನ್ನಿಹಿತವಾಗಿದೆ. ಈ ಹೊತ್ತಲ್ಲಿ ರಾಜ್ಯ ನಾಯಕರು ದೆಹಲಿಗೆ ತೆರಳಿ ತಮ್ಮ ಮನದ ಇಂಗಿತವನ್ನು ವ್ಯಕ್ತಪಡಿಸುತ್ತಿದ್ದಾರೆ. ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಚುನಾವಣೆಗೆ ಟಿಕೆಟ್ ಗಿಟ್ಟಿಸಲು ಕಸರತ್ತು ನಡೆಸುತ್ತಿದ್ದಾರೆ ಎಂದು ಮೂಲಗಳು ಹೇಳಿವೆ.
ಈಚೆಗೆ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ದೆಹಲಿಗೆ ತೆರಳಿ ಅಮಿತ್ ಶಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು. ಇವರು ತಮ್ಮ ಪುತ್ರ ಕಾಂತೇಶ್‌ನನ್ನು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಸಲು ಟಿಕೆಟ್ ಲಾಬಿ ನಡೆಸುತ್ತಿದ್ದಾರೆ ಎನ್ನಲಾಗಿತ್ತು. ವಿಧಾನಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಸೋತಿದ್ದ ಸೋಮಣ್ಣ ಕೂಡ ದೆಹಲಿಗೆ ಭೇಟಿ ನೀಡಿ ಪಕ್ಷದ ನಾಯಕರನ್ನು ಭೇಟಿಯಾಗಿದ್ದರು.

Leave a comment

Your email address will not be published. Required fields are marked *