September 13, 2026
#ಬೆಂಗಳೂರು

ಮತ್ತೆ ಬಿಜೆಪಿಗೆ ಸೇರುತ್ತಾರಾ ಜನಾರ್ದನ ರೆಡ್ಡಿ?

ಬೆಂಗಳೂರು:
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಪಕ್ಷಕ್ಕೆ ಮರು ಸೇರ್ಪಡೆಗೊಳಿಸಿದ ಬೆನ್ನಲ್ಲೇ ಬಿಜೆಪಿ ನಾಯಕರು ಕೊಪ್ಪಳ ಜಿಲ್ಲೆ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರನ್ನು ಸಂಪರ್ಕಿಸಿದ್ದಾರೆ. ಮತ್ತೆ ಪಕ್ಷಕ್ಕೆ ಸೇರುವಂತೆ ಕೇಳಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸಂಸ್ಥಾಪಕರೂ ಆಗಿರುವ ಶಾಸಕ ಜನಾರ್ದನ ರೆಡ್ಡಿ ಬಳಿ ಅವರ ಪಕ್ಷವನ್ನು ಬಿಜೆಪಿ ಜತೆ ವಿಲೀನ ಮಾಡುವಂತೆ ಕೋರಲಾಗಿದೆ. ಬಳಿಕ ಕೊಪ್ಪಳ ಕ್ಷೇತ್ರದಿಂದ ಜನಾರ್ದನ ರೆಡ್ಡಿಯನ್ನು ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿದೆ ಎನ್ನಲಾಗಿದೆ.
ವಿಲೀನದ ಬಗ್ಗೆ ಜನಾರ್ದನ ರೆಡ್ಡಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ, ಕೊಪ್ಪಳ, ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಸಹಕಾರಕ್ಕೆ ಒಲವು ತೋರ್ಪಡಿಸಿದ್ದಾರೆ ಎನ್ನಲಾಗಿದೆ. ರೆಡ್ಡಿ ಅವರು ಈ ಎರಡೂ ಕ್ಷೇತ್ರದಲ್ಲಿ ಬಿಜೆಪಿಗೆ ಸಹಕರಿಸುವ ಮಾತುಗಳನ್ನಾಡಿದ್ದಾರೆ. ಪ್ರಧಾನಿ ಮೋದಿ ಪರ ಅಭಿಪ್ರಾಯ ವ್ಯಕ್ತಪಡಿಸಿ ಜನಾರ್ದನ ರೆಡ್ಡಿ ಮಾತನಾಡಿದ್ದಾರೆ. ಹೀಗಾಗಿ ರೆಡ್ಡಿಯನ್ನು ಮತ್ತೆ ಪಕ್ಷಕ್ಕೆ ಸೆಳೆಯಲು ಬಿಜೆಪಿ ಪ್ರಯತ್ನ ಆರಂಭಿಸಿದೆ.
ಕಾರ್ಯಕ್ರಮವೊAದರಲ್ಲಿ ಮಾತನಾಡಿದ ಜನಾರ್ದನ ರೆಡ್ಡಿ, ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ವಿಚಾರದಲ್ಲಿ ಪ್ರಧಾನಿ ಮೋದಿ ಅವರನ್ನು ಅಭಿನಂದಿಸಬೇಕು. ಇಡೀ ವಿಶ್ವವೇ ತಿರುಗಿ ನೋಡುವ ಕೆಲಸವನ್ನು ಪ್ರಧಾನಿ ಮೋದಿ ಮಾಡಿದ್ದಾರೆ ಎಂದು ಹೇಳಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮವೊಂದರಲ್ಲಿ ಜನಾರ್ದನ ರೆಡ್ಡಿ ಈ ಹೇಳಿಕೆ ನೀಡಿದ್ದರು.
ಜನಾರ್ದನ ರೆಡ್ಡಿ ಅವರು ಈ ಹಿಂದೆ ಬಿಜೆಪಿಯಲ್ಲೇ ಇದ್ದವರು. ಅಕ್ರಮ ಗಣಿಗಾರಿಕೆ ಸೇರಿದಂತೆ ಹಲವು ಆರೋಪಗಳಿಂದಾಗಿ ಪಕ್ಷ ತ್ಯಜಿಸಬೇಕಾದ ಸಂದರ್ಭ ಅವರಿಗೆ ಒದಗಿಬಂದಿತ್ತು. ಅದಾದ ನಂತರದಲ್ಲಿ ಅವರು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪನೆ ಮಾಡಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಬಿಜೆಪಿ ನಾಯಕ ಶ್ರೀರಾಮುಲು ಆಪ್ತರೂ ಆಗಿರುವ ರೆಡ್ಡಿ ಬಿಜೆಪಿಯ ಹಿರಿಯ ನಾಯಕಿ, ಕೇಂದ್ರದ ಮಾಜಿ ಸಚಿವೆ ದಿ. ಸುಷ್ಮಾ ಸ್ವರಾಜ್ ಜತೆ ಉತ್ತಮ ಬಾಂಧವ್ಯ ಹೊಂದಿದ್ದರು.
ಇದೀಗ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ರೆಡ್ಡಿ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡು ಬಲ ವೃದ್ಧಿಸುವತ್ತ ಬಿಜೆಪಿ ದೃಷ್ಟಿ ನೆಟ್ಟಿದೆ. ಆದರೆ, ರೆಡ್ಡಿ ಅವರು ಬಿಜೆಪಿ ಸೇರ್ಪಡೆಗೆ ಮನ ಮಾಡುತ್ತಾರಾ ಎಂಬುದನ್ನು ಕಾದುನೋಡಬೇಕಿದೆ.

Leave a comment

Your email address will not be published. Required fields are marked *