July 29, 2026
#ಬೆಂಗಳೂರು

ಶಾಮನೂರು ಹೇಳಿಕೆಗೆ ಡಿಕೆ ಶಿವಕುಮಾರ್ ಸಿಡಿಮಿಡಿ

ಬೆಂಗಳೂರು:
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸಂಸದ ಬಿವೈ ರಾಘವೇಂದ್ರ ಗೆಲ್ಲಬೇಕು ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಹೇಳಿರುವುದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಸಿಡಿಮಿಡಿಗೊಂಡಿದ್ದಾರೆ. ಶಾಮನೂರು ಹೇಳಿಕೆಗೆ ತಿರುಗೇಟು ನೀಡಿದ ಅವರು, ಶಿವಮೊಗ್ಗದಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ಹೇಳಿದ್ದಾರೆ. ಶಿವಮೊಗ್ಗದ ಬೆಕ್ಕಿನ ಕಲ್ಮಠದಲ್ಲಿ ಬಸವಶ್ರೀ ಪ್ರಶಸ್ತಿ ಸ್ವೀಕಾರ ಮಾಡಿದ ನಂತರ ಶುಕ್ರವಾರ ಮಾತನಾಡಿದ್ದ ಶಾಮನೂರು ಶಿವಶಂಕರಪ್ಪ, ಜಿಲ್ಲೆಯ ಜನರು ಉತ್ತಮ ಸಂಸದರನ್ನು ಆಯ್ಕೆ ಮಾಡಿದ್ದೀರಿ. ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಆಗಿದೆ ಎಂದು ಸಂಸದ ರಾಘವೇಂದ್ರ ಅವರನ್ನು ಶ್ಲಾಘಿಸಿದ್ದರು.
ಮತ್ತೊಂದೆಡೆ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿರ್ನಾಮ ಮಾಡಬೇಕು ಎಂಬ ಜಗದೀಶ್ ಶೆಟ್ಟರ್ ಹೇಳಿಕೆಗೂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ನಿರ್ನಾಮ ಮಾಡಲು ಶೆಟ್ಟರ್ ಕರೆ ನೀಡಿದ್ದರು. ಇದೇ ಶೆಟ್ಟರ್ ಬಿಜೆಪಿ ನಿರ್ಮಾಮ ಮಾಡಿ ಎಂದು ಕರೆ ನೀಡಿದ್ದರು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಶಾಮನೂರು ಶಿವಶಂಕರಪ್ಪ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಪ್ರತಿಪಕ್ಷ ನಾಯಕ ಆರ್ ಅಶೋಕ, ಪ್ರಧಾನಿ ಮೋದಿ ಉತ್ತಮ ಕೆಲಸ ಮಾಡಿದ್ದಾರೆ. ಮೋದಿ ಬೆಂಬಲಿಸಿ, ರಾಘವೇಂದ್ರ ಅವರಿಗೆ ಮತ ನೀಡಿ ಎಂದು ಶಾಮನೂರು ಹೇಳಿದ್ದಾರೆ. ಇದು ಏನು ಸಂದೇಶ ನೀಡುತ್ತದೆ ಎಂಬುದು ಗೊತ್ತಲ್ವಾ. ಕಾಂಗ್ರೆಸ್ ಮನೆಯೊಂದು ಮೂರು ಬಾಗಿಲಾಗಿದೆ. ಮುಂದೆ ಒಡೆದು ನೂರು ಚೂರು ಆಗಲಿದೆ ಎಂದು ಹೇಳಿದ್ದಾರೆ.
ಕೆಲವರು ಸಂಸದರಾಗಿ ಗೆದ್ದು ಸಂಸತ್‌ಗೆ ಹೋಗಿ ಬಂದದ್ದಷ್ಟೇ ಗೊತ್ತು. ಆದರೆ, ಸಂಸದ ರಾಘವೇಂದ್ರ ಹಾಗಲ್ಲ. ಉತ್ತಮ ಕೆಲಸ ಮಾಡಿದ್ದಾರೆ. ವಿಪಕ್ಷ ಸಂಸದರ ಕೆಲಸವನ್ನು ಒಬ್ಬ ವ್ಯಕ್ತಿ ಮೆಚ್ಚಿ ಹೇಗೆ ಮಾತನಾಡಬಹುದು ಎಂಬುದಕ್ಕೆ ಶಾಮನೂರು ಶಿವಶಂಕರಪ್ಪ ಅವರ ಮಾತುಗಳೇ ಉದಾಹರಣೆ ಎಂದು ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಶಾಮನೂರು ಶಿವಶಂಕರಪ್ಪ ವಯಸ್ಸಿನಲ್ಲಿ ಅಷ್ಟೇ ಅಲ್ಲ, ಆಲೋಚನೆಯಲ್ಲೂ ಹಿರಿಯರು. ಅವರು ಸರಿಯಾದ್ದನ್ನೇ ಹೇಳಿದ್ದಾರೆ ಎಂದು ಆರಗ ಜ್ಞಾನೇಂದ್ರ ಅಭಿಪ್ರಾಯಪಟ್ಟಿದ್ದಾರೆ.
ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಯಿಸಿದ್ದು, ರಾಘವೇಂದ್ರ ಅವರ ಕಾರ್ಯವನ್ನು ಎಲ್ಲರೂ ಮೆಚ್ಚಿದ್ದಾರೆ. ಅದನ್ನು ಬಹಿರಂಗವಾಗಿ ಪ್ರಕಟಪಡಿಸಿದ್ದಕ್ಕಾಗಿ ಶಾಮನೂರು ಶಿವಶಂಕರಪ್ಪ ಅವರನ್ನು ಅಭಿನಂದಿಸುತ್ತೇನೆ ಎಂದು ಹೇಳಿದ್ದಾರೆ.

Leave a comment

Your email address will not be published. Required fields are marked *