ಟ್ರೆಕ್ಕಿಂಗ್ಗೆ ತಾತ್ಕಾಲಿಕ ಬ್ರೇಕ್ ಹಾಕಿದ ಸರ್ಕಾರ
ಬೆಂಗಳೂರು:
ಅನಧಿಕೃತ ಚಾರಣಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ಪ್ರಮಾಣಿತ ಕಾರ್ಯ ವಿಧಾನ ಜಾರಿಯಾಗುವವರೆಗೂ ಚಾರಣಕ್ಕೆ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಆನ್ಲೈನ್ ಬುಕ್ಕಿಂಗ್ ಇಲ್ಲದ ಚಾರಣ ಪಾಯಿಂಟ್ಗಳಿಗೆ ನಿಷೇಧಿಸಲಾಗಿದೆ. ಆನ್ಲೈನ್ ಬುಕ್ಕಿಂಗ್ ವ್ಯವಸ್ಥೆ, ನಿರ್ದಿಷ್ಟ ಸಂಖ್ಯೆಗೆ ಸೀಮಿತಗೊಳಿಸುವ ಕಾರಣ ನಿಷೇಧಿಸಲಾಗಿದೆ. ಅರಣ್ಯ ವ್ಯಾಪ್ತಿಯ ಗಿರಿ ಶಿಬಿರಗಳಲ್ಲಿ ಚಾರಣ ಮಾಡುವರ ಹವ್ಯಾಸ ಏರಿಕೆಯಾಗಿದ್ದು, ವಾರಾಂತ್ಯದಲ್ಲಿ ಜನದಟ್ಟಣೆ ಹೆಚ್ಚಾಗುತ್ತಿದೆ.
ಅಲ್ಲದೆ ಚಾರಣ ಹೋದವರು ಅರಣ್ಯ ಪ್ರದೇಶಗಳಲ್ಲಿ ಪ್ಲಾಸ್ಟಿಕ್ ಬ್ಯಾಗ್, ಬಾಟಲಿ ಎಸೆಯುತ್ತಿದ್ದಾರೆ. ಇದು ವನ್ಯಜೀವಿಗಳಿಗೆ ಅಪಾಯ ತರುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಹೀಗಾಗಿ ಚಾರಣಕ್ಕೆ ನಿರ್ಬಂಧ ವಿಧಿಸಿ ಸಚಿವ ಈಶ್ವರ್ ಖಂಡ್ರೆ ಆದೇಶ ಹೊರಡಿಸಿದ್ದಾರೆ.
ಗಣರಾಜ್ಯೋತ್ಸವದ ದಿನ ಕುಮಾರಪರ್ವತಕ್ಕೆ ಸಾವಿರಾರು ಚಾರಣಿಗರು ಆಗಮಿಸಿದ್ದು ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ. ಕೆಲವರು ಟೆಂಟ್ ಹಾಕಿ ರಾತ್ರಿ ಪರ್ವತದಲ್ಲಿ ಉಳಿಯುತ್ತಾರೆ ಎನ್ನಲಾಗಿದೆ. ಪರಿಸರ ತಜ್ಞರು ಅರಣ್ಯ ಉಳಿವಿನ ಬಗ್ಗೆ ತಮ್ಮ ಕಳಕಳಿ ಜೊತೆಗೆ ಆತಂಕ ವ್ಯಕ್ತಪಡಿಸಿದ್ದಾರೆ. ಈ ರೀತಿ ಸಾವಿರಾರು ಸಂಖ್ಯೆಯಲ್ಲಿ ಚಾರಣಕ್ಕೆ ಬರುವವರನ್ನು ನಿಯಂತ್ರಿಸುವುದು ಸವಾಲಿನ ಕೆಲಸವಾಗಿದೆ. ಜೊತೆಗೆ ಅವರ ತಪಾಸಣೆ ಮಾಡಿ ಬಿಡುವುದು ಅರಣ್ಯ ಇಲಾಖೆಯ ಸಿಬ್ಬಂದಿಗೂ ದೊಡ್ಡ ಸಮಸ್ಯೆಯಾಗಿದೆ. ಹೀಗಾಗಿ ಹೊಸ ಮಾರ್ಗಸೂಚಿ ಜಾರಿಯಾಗುವ ತನಕ ಬುಕ್ಕಿಂಗ್ ಇಲ್ಲದ ಚಾರಣವನ್ನು ಸರ್ಕಾರ ನಿಷೇಧಿಸಿದೆ.
ಸರ್ಕಾರ ಹೊರಡಿಸಿದ ಆದೇಶದಲ್ಲಿ ಏನಿದೆ?
ರಾಜ್ಯದ ಯುವಜನರಲ್ಲಿ ಇತ್ತೀಚೆಗೆ ಅರಣ್ಯವ್ಯಾಪ್ತಿಯ ಗಿರಿ ಶಿಖರಗಳಲ್ಲಿ ಚಾರಣ ಮಾಡುವ ಹವ್ಯಾಸ ಅಧಿಕವಾಗಿದ್ದು, ಇದು ವಾರಾಂತ್ಯದಲ್ಲಿ ಜನದಟ್ಟಣೆಗೆ ಕಾರಣವಾಗಿದೆ. ಹೀಗೆ ಬರುವವರು ಅರಣ್ಯದ ಅಂಚಿನ ಗ್ರಾಮಗಳಲ್ಲಿ ಮತ್ತು ಪರಿಸರ ಸೂಕ್ಷ್ಮ ಪ್ರದೇಶಗಳಲ್ಲಿ ಮನಸೋ ಇಚ್ಛೆ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಬಾಟಲಿ, ತಟ್ಟೆ, ಉಳಿದ ಆಹಾರ ಪದಾರ್ಥ ಇತ್ಯಾದಿಗಳನ್ನು ಎಸೆಯುತ್ತಿದ್ದು, ಇದು ವನ್ಯಜೀವಿಗಳಿಗೆ ಅಪಾಯ ತರುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ.
ಇದೇ ತಿಂಗಳು ೨೬ ರಂದು ಕುಮಾರಪರ್ವತಕ್ಕೆ ಸಾವಿರಾರು ಚಾರಣಿಗರು ಆಗಮಿಸಿದ್ದು ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದ್ದು, ಮಾಧ್ಯಮಗಳಲ್ಲೂ ವರದಿಯಾಗಿದೆ. ಕೆಲವರು ಟೆಂಟ್ ಹಾಕಿ ರಾತ್ರಿ ಪರ್ವತದಲ್ಲಿ ಉಳಿಯುತ್ತಾರೆ ಎನ್ನಲಾಗಿದೆ. ಪರಿಸರ ತಜ್ಞರು ಅರಣ್ಯ ಉಳಿವಿನ ಬಗ್ಗೆ ತಮ್ಮ ಕಳಕಳಿ. ಆತಂಕ ವ್ಯಕ್ತಪಡಿಸಿದ್ದಾರೆ. ಹೀಗೆ ಸಾವಿರಾರು ಸಂಖ್ಯೆಯಲ್ಲಿ ಚಾರಣಕ್ಕೆ ಜನರು ದಟ್ಟ ಅರಣ್ಯವಿರುವ ಗಿರಿ ಪ್ರದೇಶಗಳಿಗೆ, ಪಶ್ಚಿಮಘಟ್ಟಕ್ಕೆ ಪ್ರತಿವಾರವೂ ಆಗಮಿಸಿದರೆ ನಿಯಂತ್ರಿಸುವುದು ಮತ್ತು ಅವರ ತಪಾಸಣೆ ಮಾಡಿ ಬಿಡುವುದು ಅರಣ್ಯ ಇಲಾಖೆಯ ಸಿಬ್ಬಂದಿಗೂ ದೊಡ್ಡ ಸವಾಲಾಗುತ್ತದೆ. ಇದರಿಂದ ಪರಿಸರಕ್ಕೂ ಹಾನಿಯಾಗುತ್ತದೆ ಮತ್ತು ಜಲ ಮೂಲಗಳೂ ಕಲುಷಿತಗೊಳ್ಳುವ ಅಪಾಯ ಇದೆ.
ಈ ನಿಟ್ಟಿನಲ್ಲಿ ರಾಜ್ಯದ ಎಲ್ಲ ಚಾರಣ ತಾಣ (ಟ್ರಕ್ಕಿಂಗ್ ಪಾಯಿಂಟ್)ಗಳಲ್ಲೂ ಆನ್ ಲೈನ್ ಬುಕ್ಕಿಂಗ್ ವ್ಯವಸ್ಥೆ ಮತ್ತು ನಿರ್ದಿಷ್ಟ ಸಂಖ್ಯೆಗೆ ಸೀಮಿತಗೊಳಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಪ್ರಮಾಣಿತ ಕಾರ್ಯ ವಿಧಾನ ರೂಪಿಸುವವರೆಗೆ ಆನ್ ಲೈನ್ ಬುಕ್ಕಿಂಗ್ ಇಲ್ಲದ ಎಲ್ಲ ಚಾರಣ ತಾಣಗಳಲ್ಲಿ ತಾತ್ಕಾಲಿಕವಾಗಿ ಚಾರಣ ನಿರ್ಬಂಧಿಸುವAತೆ ಸೂಚಿಸಿದೆ.









































































































































































































































































































































































































































































































































































































































































































































































































































































































































































































































































































































