September 12, 2026
#ಜಿಲ್ಲೆ

ಶೆಟ್ಟರ್ ಬಿಜೆಪಿ ಸೇರ್ಪಡೆ ಬೆನ್ನಲ್ಲೇ ಅಲರ್ಟ್ ಆದ ‘ಕೈ’ ಹೈಕಮಾಂಡ್;ಲಕ್ಷ್ಮಣ ಸವದಿ ಜೊತೆ ನಿರಂತರ ಸಂಪರ್ಕ

ಬೆಳಗಾವಿ:
ಮಾಜಿ ಸಿಎಂ, ಕಾಂಗ್ರೆಸ್‌ನ ಎಂಎಲ್‌ಸಿ ಆಗಿದ್ದ ಜಗದೀಶ್ ಶೆಟ್ಟರ್ ಅವರು ಕಳೆದ ವಿಧಾನಸಭಾ ಚುನಾವಣೆ ವೇಳೆ ಟಿಕೆಟ್ ಸಿಗದಿದ್ದಕ್ಕೆ ಬಿಜೆಪಿ ಹೈಕಮಾಂಡ್ ವಿರುದ್ಧ ಮುನಿಸಿಕೊಂಡು ಕಾಂಗ್ರೆಸ್ ಸೇರಿದ್ದರು. ಚುನಾವಣೆಯಲ್ಲಿ ಸೋತರೂ ಕಾಂಗ್ರೆಸ್ ಎಂಎಲ್‌ಸಿ ಸ್ಥಾನ ನೀಡಿ ಗೌರವಿಸಿತ್ತು. ಇಷ್ಟೆಲ್ಲ ಇದ್ದರೂ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ ಸೇರಿದ್ದಾರೆ. ಇದು ಕಾಂಗ್ರೆಸ್‌ಗೆ ಭಾರೀ ಆಘಾತ ತಂದಿದೆ. ಮತ್ತೊಂದೆಡೆ ಲಕ್ಷ್ಮಣ ಸವದಿ ಕೂಡ ಬಿಜೆಪಿ ಸೇರುತ್ತಾರೆ ಎಂಬ ಬಗ್ಗೆ ಮಾತುಗಳು ಹರಿದಾಡುತ್ತಿದ್ದು ಕಾಂಗ್ರೆಸ್ ಹೈಕಮಾಂಡ್ ಅಲರ್ಟ್ ಆಗಿದ್ದಾರೆ.
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆ ಬೆನ್ನಲ್ಲೇ ‘ಕೈ’ ಹೈಕಮಾಂಡ್ ಅಲರ್ಟ್ ಆಗಿದ್ದಾರೆ. ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾದವರನ್ನ ಪಕ್ಷದಲ್ಲೇ ಉಳಿಸಿಕೊಳ್ಳಲು ಪ್ರಯತ್ನ ನಡೆಸಲಾಗುತ್ತಿದೆ. ಲೋಕಸಭೆ ಚುನಾವಣೆ ಹೊತ್ತಲ್ಲಿ ಪಕ್ಷ ಬಿಟ್ಟು ಹೋಗದಂತೆ ನೋಡಿಕೊಳ್ಳಲು ಕಾಂಗ್ರೆಸ್ ನಾನಾ ಸರ್ಕಸ್ ಮಾಡುತ್ತಿದೆ. ಶಾಸಕ ಲಕ್ಷ್ಮಣ ಸವದಿ ಕೂಡ ಪಕ್ಷ ಬಿಡದಂತೆ ಕೈ ನಾಯಕರು ಎಚ್ಚರಿಕೆ ವಹಿಸಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ಶಾಸಕ ಲಕ್ಷ್ಮಣ ಸವದಿ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದಾರೆ.
ಪಕ್ಷ ಬಿಡಬೇಡಿ ಎಂದು ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅವರು ಲಕ್ಷ್ಮಣ ಸವದಿಗೆ ಹೇಳಿದ್ದಾರೆ. ಎಲ್ಲಾ ಬೆಳವಣಿಗೆಗಳ ನಡುವೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಸವದಿಗೆ ಕರೆ ಮಾಡಿ ಚರ್ಚೆ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ಬಿಡದಂತೆ ಮತ್ತು ಸೂಕ್ತ ಸ್ಥಾನಮಾನ ನೀಡುವುದಾಗಿ ಸವದಿಗೆ ಭರವಸೆ ನೀಡಿದ್ದಾರೆ. ಮುಂದಿನ ವಾರ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಅವರು ಲಕ್ಷ್ಮಣ ಸವದಿ ಅವರನ್ನು ಭೇಟಿಯಾಗುವ ಸಾಧ್ಯತೆ ಇದೆ. ದೆಹಲಿಯಲ್ಲಿ ಸುರ್ಜೇವಾಲ ಭೇಟಿ ವೇಳೆ ಕೆಲ ಬೇಡಿಕೆ ಇಡಲು ಸವದಿ ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ಇತ್ತೀಚೆಗೆ ಜಗದೀಶ್ ಶೆಟ್ಟರ್ ಅವರು ಹುಬ್ಬಳ್ಳಿಯಲ್ಲಿ ಸ್ಫೋಟಕ ಹೇಳಿಕೆ ನೀಡಿದ್ದರು. ಕಾಂಗ್ರೆಸ್‌ನ ಬಹಳಷ್ಟು ಜನರು ನನ್ನ ಸಂಪರ್ಕದಲ್ಲಿದ್ದಾರೆ. ಶೀಘ್ರದಲ್ಲೇ ಅವರೆಲ್ಲ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿಸಿದ್ದರು. ನನ್ನ ಜೊತೆ ಕಾಂಗ್ರೆಸ್ ಸೇರಿದವರು ಎಲ್ಲರೂ ವಾಪಸ್ ಬಿಜೆಪಿಗೆ ಬರುತ್ತಾರೆ. ಬೇರೆ ಬೇರೆ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಕೂಡ ಬಿಜೆಪಿ ಸೇರಲು ಇಚ್ಛೆ ವ್ಯಕ್ತಪಡಿಸುತ್ತಿದ್ದಾರೆ. ನಿಮ್ಮ ಜೊತೆಗೆ ಬಿಜೆಪಿಗೆ ಬರುತ್ತೇವೆ ಎನ್ನುತ್ತಿದ್ದಾರೆ ಎಂದು ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ್ದರು. ಸದ್ಯ ಈಗ ಕಾಂಗ್ರೆಸ್ ಅಲರ್ಟ್ ಆಗಿದ್ದು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದವರನ್ನು ತಮ್ಮ ಪಕ್ಷದಲ್ಲೇ ಉಳಿಸಿಕೊಳ್ಳಲು ನಾನಾ ಪ್ರಯತ್ನಗಳನ್ನು ಪಡುತ್ತಿದೆ.

Leave a comment

Your email address will not be published. Required fields are marked *