ಉತ್ತಮ ಶಿಕ್ಷಣ ನೀಡುವುದು ನಮ್ಮ ಆದ್ಯತೆ: ಡಿಕೆಶಿ
ಬೆಂಗಳೂರು: ಬಡವರ ಮಕ್ಕಳು ಬೆಂಗಳೂರಿನ ಬಿಬಿಎಂಪಿ ಶಾಲೆಗಳಲ್ಲಿ ಓದುತ್ತಿದ್ದು, ಅವರಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಸಿಗುವಂತೆ ಮಾಡುವುದು ನಮ್ಮ ಆದ್ಯತೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
ಸದಾಶಿವನಗರ ನಿವಾಸದ ಬಳಿ ಅತಿಥಿ ಉಪನ್ಯಾಸಕರು ಅಹವಾಲು ಸಲ್ಲಿಸಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ಬೆಂಗಳೂರಿನ ಅತಿಥಿ ಉಪನ್ಯಾಸಕರು ಇಂದು ನನ್ನನ್ನು ಭೇಟಿ ಮಾಡಿ, ನಮ್ಮನ್ನು ಸೇವೆಯಲ್ಲಿ ಮುಂದುವರಿಸಬೇಕು ಎಂದು ಕೇಳಿಕೊಂಡರು.
ಸೆಕ್ಯೂರಿಟಿ ಏಜೆನ್ಸಿ ಅವರು ಶಿಕ್ಷಕರನ್ನು ನೇಮಿಸುತ್ತಾರೆ ಎಂಬ ದೂರು ಬಂದಿದೆ. ಯಾರು ಯಾವ ಕೆಲಸ ಮಾಡಬೇಕೋ ಅವರು ಅದನ್ನೇ ಮಾಡಬೇಕು. ಇಂದು ಆಗಮಿಸಿದವರಲ್ಲಿ ಉತ್ತಮವಾಗಿ ಬೋಧನೆ ಮಾಡುವ ಶಿಕ್ಷಕರಿಗೆ ಪ್ರಾತಿನಿಧ್ಯ ನೀಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದ್ದೇನೆ. ಈ ವಿಚಾರವಾಗಿ ಮತ್ತೆ ಪರಿಶೀಲನೆ ಮಾಡುತ್ತೇನೆ. ನಮಗೆ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದು ಬಹಳ ಮುಖ್ಯ ಎಂದರು.
ಬಿಬಿಎಂಪಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಕುಸಿದಿದೆ ಎಂಬ ಕಾರಣಕ್ಕೆ ಶಿಕ್ಷಣ ಇಲಾಖೆ ಸುಪರ್ದಿಗೆ ಈ ಶಾಲೆಗಳನ್ನು ನೀಡಿದ್ದೇವೆ. ಸರಿಯಾಗಿ ತರಬೇತಿ ಹೊಂದಿರುವ ಶಿಕ್ಷಕರನ್ನು ನೇಮಿಸಬೇಕಿದೆ. ಬಿಬಿಎಂಪಿ ವತಿಯಿಂದ ಎಲ್ಲಾ ಮೂಲಸೌಕರ್ಯ ಒದಗಿಸಲಾಗುವುದು, ಶಿಕ್ಷಣದ ಜವಾಬ್ದಾರಿಯನ್ನು ಇಲಾಖೆಗೆ ವಹಿಸಲಾಗಿದೆ ಎಂದು ಹೇಳಿದರು.
ಸಚಿವ ಭೈರತಿ ಸುರೇಶ್ ಅವರ ಭೇಟಿ ವಿಚಾರವಾಗಿ ಕೇಳಿದಾಗ, ನಮ್ಮಲ್ಲಿ ಕೆಲವು ಯೋಜನಾ ಪ್ರಾಧಿಕಾರಗಳು ಇವೆ. ಅವುಗಳಿಗೆ ಕಾರ್ಯಕರ್ತರನ್ನು ನೇಮಕ ಮಾಡಬೇಕು. ನಾಲ್ವರು ಸದಸ್ಯರನ್ನು ನೇಮಿಸಿ, ಎಲ್ಲರಿಗೂ ಅವಕಾಶ ಮಾಡಿಕೊಡಬೇಕು. ಈ ದೃಷ್ಟಿಯಿಂದ ಮಾರ್ಗದರ್ಶನ ನೀಡಿದ್ದೇನೆ. ಇನ್ನು ಲೋಕಸಭೆ ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಹೆಸರು ಸೂಚನೆ ಜವಾಬ್ದಾರಿ ಸಚಿವರಿಗೆ ನೀಡಿದ್ದು, ಸಚಿವರ ಜೊತೆ ಚರ್ಚೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ನಿಗಮ, ಮಂಡಳಿಗಳಿಗೆ ಯಾವಾಗ ನೇಮಕ ಆಗಲಿದೆ ಎಂಬ ಪ್ರಶ್ನೆಗೆ, ಯಾವುದೇ ಕ್ಷಣದಲ್ಲಿ ಬೇಕಾದರೂ ಆಗಬಹುದು ಎಂದು ಉತ್ತರಿಸಿದರು. ಕನ್ನಡ ನಾಮಫಲಕ ವಿಚಾರವಾಗಿ ಕನ್ನಡಪರ ಸಂಘಟನೆಗಳ ಹೋರಾಟದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕನ್ನಡಪರ ಸಂಘಟನೆಗಳು ಕಾನೂನಿನ ಚೌಕಟ್ಟಿನಲ್ಲಿ ಹೋರಾಟ ಮಾಡಬೇಕು. ಹೋರಾಟದ ಹೆಸರಿನಲ್ಲಿ ಯಾರ ಆಸ್ತಿಪಾಸ್ತಿಗೂ ಹಾನಿ ಮಾಡಬಾರದು. ಬೆಂಗಳೂರಿಗೆ ಬಂದು ವ್ಯಾಪಾರ ಮಾಡಿ ಬದುಕುತ್ತಿರುವವರು ತಮ್ಮ ಮಳಿಗೆ ಬೋರ್ಡ್ನಲ್ಲಿ 60% ನಷ್ಟು ಕನ್ನಡ ಇರಬೇಕು ಎಂಬ ಕಾನೂನು ಇದ್ದು, ಯಾರು ಎಷ್ಟೇ ದೊಡ್ಡ ವ್ಯಾಪಾರಸ್ಥರಾದರೂ ಎಲ್ಲರೂ ಅದನ್ನು ಪಾಲನೆ ಮಾಡಬೇಕು ಎಂದರು.
ಹಿಜಬ್ ವಿಚಾರವಾಗಿ ಮಾತನಾಡಿದ ಅವರು, ನಾವು ಆ ವಿಚಾರವಾಗಿ ಆಲೋಚನೆ ಮಾಡಿಲ್ಲ. ಮಾಧ್ಯಮಗಳೇ ಇದನ್ನು ದೊಡ್ಡ ವಿಷಯ ಮಾಡುತ್ತಿವೆ. ಹಿಜಬ್ ವಿಚಾರವಾಗಿ ಚರ್ಚೆಗೆ ಬರುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ಸರ್ಕಾರದ ಮುಂದೆ ಪ್ರಸ್ತಾವನೆ ಎಲ್ಲಿದೆ ಎಂದು ಪ್ರಶ್ನಿಸಿದರು.
ಇಂಡಿಯಾ ಮೈತ್ರಿಕೂಟ ಲೋಕಸಭೆ ಚುನಾವಣೆ ಮುನ್ನವೇ ಮುರಿದು ಬೀಳಲಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ, ಎನ್ಡಿಎ ಮೈತ್ರಿಕೂಟ ಮುರಿದು ಬೀಳಲಿದೆ ಎಂದು ತಿಳಿಸಿದರು. ಸಚಿವ ಶಿವಾನಂದ ಪಾಟೀಲ್ ವಿವಾದಾತ್ಮಕ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ ಎಂದು ತಿಳಿಸಿದರು.








































































































































































































































































































































































































































































































































































































































































































































































































































































































































































































































































































































